Saturday, September 12, 2009

ಸ್ವಾಮಿಯೇ ಶರಣಂ ಅಯ್ಯಪ್ಪ ‘ನನ್ನ ಹೈಸ್ಕೂಲು ದಿನಗಳು’ ಪುಸ್ತಕದ ಇ-ರೂಪ : ಭಾಗ - ೨೪

ಎಂಬತ್ತರ ದಶಕದಲ್ಲಿ ಅಯ್ಯಪ್ಪ ಸ್ವಾಮಿಯ ಯಾತ್ರೆಗೆ ಹೋಗುವವರ ಸಂಖ್ಯೆ ಬಯಲುಸೀಮೆಯಲ್ಲಿ ಅಗಾಧವಾಗಿ ಹೆಚ್ಚುತ್ತಿತ್ತು. ಈಗಲೂ ಆ ಸಂಖ್ಯೆಯೇನು ಕಡಿಮೆಯಾಗಿಲ್ಲ. ಆದರೆ ಮೊದಲಿನಂತೆ ನಲವತ್ತೆಂಟು ದಿನಗಳ ಕಾಲ ವ್ರತ ಹಿಡಿದು ಹೋಗುವವರ ಸಂಖ್ಯೆ ಕಡಿಮೆಯಾಗಿದೆ ಅಷ್ಟೆ! ಈಗ, ಹಿಂದಿನ ದಿನ ಮಾಲೆ ಧರಿಸಿ ಹೊರಡುವುದು, ಶಬರಿಮಲೆಗೆ ಹೋಗಿ ಅಲ್ಲಿಯೇ ಮಾಲೆ ಧರಿಸುವುದು ಫ್ಯಾಷನ್ ಆಗಿದೆ. ಅದಕ್ಕಿಂತ ಹೆಚ್ಚಾಗಿ, ಅಲ್ಲಿಯೇ ಸ್ಥಳೀಯವಾಗಿ ಸ್ಥಾಪಿತವಾಗಿರುವ ಅಯ್ಯಪ್ಪನ ಗುಡಿಗಳಿಗಷ್ಟೇ ಹೋಗಿಬರುವುದೂ ಇದೆ! ಇದೊಂದು ರೀತಿಯಲ್ಲಿ, ಜನರು ಮೂಡನಂಬಿಕೆಗಳನ್ನು ತಕ್ಕಮಟ್ಟಿಗಾದರೂ ನಿರಾಕರಿಸಿ, ವಿಚಾರವಂತರಾಗುತ್ತಿರುವುದನ್ನು ಸೂಚಿಸುತ್ತದೆ, ಅಲ್ಲವೆ?

ಕುಂದೂರುಮಠದ ಸುತ್ತಮುತ್ತಲಿನ ಹಳ್ಳಿಗಳಲ್ಲೂ ಅಯ್ಯಪ್ಪಸ್ವಾಮಿಯ ಖಾಯಿಲೆ ಚೆನ್ನಾಗಿಯೇ ಹಬ್ಬಿಬಿಟ್ಟಿತ್ತು. ಅಲ್ಲಿಂದ ಒಂದು ಕಿಲೋಮೀಟರ್ ದೂರದಲ್ಲಿದ್ದ ಅಗ್ರಹಾರ ಎಂಬ ಊರಿನ ಕೆಲವರು ಮಠದಲ್ಲಿ ಕಾಲಕಳೆಯುತ್ತಿದ್ದ ಸೋಮಾರಿಗಳ ಗುಂಪಿನ ಖಾಯಂ ಸದಸ್ಯರಾಗಿದ್ದರು. ಅವರೆಲ್ಲರು, ಇನ್ನೂ ಕೆಲವರನ್ನು ಸೇರಿಸಿ ಅಯ್ಯಪ್ಪಸ್ವಾಮಿ ಯಾತ್ರೆ ಮಾಡುವುದಕ್ಕೆ ಸಿದ್ಧತೆ ನಡೆಸಿದರು. ಮಠದ ಹೊರ ಬಯಲಿನಲ್ಲಿ ತಾತ್ಕಾಲಿಕವಾಗಿ ಒಂದು ಚಪ್ಪರವನ್ನು ನಿಲ್ಲಿಸಿ, ಎಲ್ಲರೂ ಮಾಲೆ ಧರಿಸಿ ಕಪ್ಪುವಸ್ತ್ರಧಾರಿಗಳಾದರು. ಕೇವಲ ರಾತ್ರಿ ಮಾತ್ರ ಮನೆಗೆ ಹೋಗುವ ಅಭ್ಯಾಸವಿದ್ದವರಿಗೆ ಈಗ ರಾತ್ರಿಯೂ ಇಲ್ಲಿಯೇ ಉಳಿಯುವ ಸುಯೋಗ!

ಆಗ ಅವರು ಆಚರಿಸುತ್ತಿದ್ದ ಕೆಲವೊಂದು ನಿಯಮಗಳು ಹೀಗಿವೆ. ಹೆಂಗಸರು ಮಾಡಿದ ಅಡುಗೆ ತಿನ್ನುವಂತಿಲ್ಲ. ದೊಡ್ಡವಳಾಗದ ಹುಡುಗಿ ಅಥವಾ ಮುಟ್ಟು ನಿಂತಿರುವ ಹೆಂಗಸು ಮಾಡಿದರೆ ಪರವಾಗಿಲ್ಲ. ಸೂರ್ಯೋದಯಕ್ಕೆ ಮುಂಚೆಯೇ ಎದ್ದು ತಣ್ಣೀರು ಸ್ನಾನ ಮಾಡಿ, ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಹಾಡಿ, ಅಡುಗೆ ಮಾಡಿಕೊಂಡು ಊಟ ಮಾಡಬೇಕು. (ಮಧ್ಯಾಹ್ನ ಊಟ ಮಾಡುವವರಿಗಾಗಿ ಮಂಜಣ್ಣ ತನ್ನ ಹೋಟೆಲ್ಲಿನಲ್ಲಿ ಬಾಳೆ ಎಲೆಗೆ ಚಿತ್ರಾನ್ನ ಹಾಕಿ ಕೊಡುತ್ತಿದ್ದ!) ಮಧ್ಯ, ಮಾಂಸ, ಬೀಡಿ, ಸಿಗರೇಟು, ಹೊಗೆಸೊಪ್ಪು ಮುಂತಾದವನ್ನು ಮುಟ್ಟುವಂತೆಯೂ ಇಲ್ಲ. ಕಾಲಿಗೆ ಚಪ್ಪಲಿಯನ್ನು ಧರಿಸುವಂತೆ ಇರಲಿಲ್ಲ. ಇವೇ ಮೊದಲಾದ ಅನೇಕ ನಿಯಮಗಳನ್ನು ಅವರು ಪಾಲಿಸುತ್ತಿದ್ದರು. ನಲವತ್ತೆಂಟು ದಿಗಳ ಮಟ್ಟಿಗಾದರೂ ಕೆಟ್ಟ ಅಭ್ಯಾಸಗಳಿಂದ ದೂರ ಇರುವುದಕ್ಕೆ ಇದೊಂದು ಅವಕಾಶ!

ಇನ್ನೊಂದು ತಮಾಷೆಯ ನಿಯಮವೆಂದರೆ, ‘ಅವರನ್ನು ಎಲ್ಲರೂ ‘ಸ್ವಾಮಿ’ ಎಂದು ಕರೆಯಬೇಕು; ಹಾಗೆ ಅವರೂ ಬೇರೆಯವರನ್ನು ‘ಸ್ವಾಮಿ’ ಎಂದೇ ಕರೆಯಬೇಕು’ ಎಂಬುದು. ಆಗ ನಮಗೆಲ್ಲಾ ಒಂದು ತರಾ ಮೋಜೆನಿಸಿ ಅವರೆಲ್ಲರನ್ನೂ ‘ಸ್ವಾಮಿ’ ಎಂದೇ ಸಂಬೋಧಿಸುತ್ತಿದ್ದೆವು. ಅವರೂ ನಮ್ಮನ್ನು ನಮ್ಮ ಹೆಸರಿನ ಮುಂದೆ ‘ಸ್ವಾಮಿ’ ಎಂದು ಸೇರಿಸಿ ಕರೆಯುತ್ತಿದ್ದರು. ಸುರೇಶಸ್ವಾಮಿ, ಹೊನ್ನೆಗೌಡಸ್ವಾಮಿ, ಪುಷ್ಪಾಚಾರಿಸ್ವಾಮಿ ಹೀಗೆ ಎಲ್ಲರೂ ‘ಸ್ವಾಮಿ’ಗಳಾಗುತ್ತಿದ್ದರು. ಮೇಷ್ಟ್ರುಗಳನ್ನು ‘ಮೇಷ್ಟ್ರುಸ್ವಾಮಿಗಳೇ’ ಎಂದು, ಕಂಡಕ್ಟರ್ಗಳನ್ನು ‘ಕಂಡಕ್ಟರ್ಸ್ವಾಮಿಗಳೇ’ ಎಂದು, ಡ್ರೈವರ್ಗಳನ್ನು ‘ಡ್ರೈವರ್ಸ್ವಾಮಿಗಳೇ’ ಎಂದು, ವಾರ್ಡನ್ನರನ್ನು ‘ವಾರ್ಡನ್ಸ್ವಾಮಿಗಳೇ’ ಎಂದು ಕರೆದು ಅವರವರ ಉದ್ಯೋಗಕ್ಕೂ ‘ಸ್ವಾಮಿ’ಯನ್ನು ಗಂಟುಹಾಕುತ್ತಿದ್ದರು. ಅದಕ್ಕಿಂತ ಹೆಚ್ಚಾಗಿ ಮಠದ ಸ್ವಾಮೀಜಿಗಳನ್ನು ‘ಸ್ವಾಮೀಜಿಸ್ವಾಮಿಗಳು’ ಎಂದು ಕರೆಯುವುದು ತಮಾಷೆಯಾಗಿರುತ್ತಿತ್ತು. ಹೆಸರು ಗೊತ್ತಿರದ ಹುಡುಗನನ್ನು ‘ಏ ಹುಡುಗ ಸ್ವಾಮಿ’ ಎಂದು ಕೂಗುತ್ತಿದ್ದರು. ಆಗ ನಾವೆಲ್ಲಾ, ‘ಹುಡುಗಿಯರನ್ನು ಕರೆಯುವುದಕ್ಕೆ ಏನನ್ನುತ್ತಾರೆ ಎಂದು ಕಲ್ಪನೆ ಮಾಡಿಕೊಂಡು ಸಂತೋಷಪಡುತ್ತಿದ್ದೆವು! ಅವರ ‘ಸ್ವಾಮೀ’ ಪದದ ಹುಚ್ಚು ಎಲ್ಲಿಗೆ ಮುಟ್ಟಿತು ಎಂದರೆ, ಅಡುಗೆ ಮಾಡುವ ಸಾಮಾನುಗಳಿಗೂ ಸ್ವಾಮೀ ಎಂದೇ ಸಂಬೋಧಿಸುವಷ್ಟು! ಪಾತ್ರೆಸ್ವಾಮಿ, ಸೌಟುಸ್ವಾಮಿ, ತರಕಾರಿಸ್ವಾಮಿ, ಅಕ್ಕಿಸ್ವಾಮಿ, ಸಾರುಸ್ವಾಮಿ, ಪಾಯಸಸ್ವಾಮಿ..... ಹೀಗೆ! ಒಂದು ದಿನ ನಮ್ಮೆದುರಿಗೇ ಒಬ್ಬ, ಅಲ್ಲಿಗೆ ಬಂದಿದ್ದ ತನ್ನ ತಾಯಿಯ ಜೊತೆ ಹೀಗೆ ಮಾತನಾಡುತ್ತಿದ್ದ. ‘ಏನು ಅವ್ವಸ್ವಾಮಿ. ಬರೇ ಇಪ್ಪತ್ತು ರೂಪಾಯಿ ತಂದಿದ್ದೀರಲ್ಲ. ನನ್ನ ಹೆಂಡತಿಸ್ವಾಮಿಗೆ ಹೇಳಿ, ಒಂದೈವತ್ತು ರೂಪಾಯಿ ತರಬಾರದಾಗಿತ್ತ. ಅಂದಂಗೆ ಮಕ್ಕಳುಸ್ವಾಮಿ ಹೇಗಿದ್ದಾವೆ. ಕುರಿದನ ಸ್ವಾಮಿಗಳನ್ನ ಚೆನ್ನಾಗಿ ನೋಡ್ಕಳ್ಳಾಕೆ ಹೇಳಿ ಅವ್ವಸ್ವಾಮಿ......’ ಹೀಗೆ ಸಾಗಿತ್ತು.

ವ್ರತದಿಂದಾಗಿ ಕೆಲವು ಸೋಮಾರಿಗಳಿಗೆ ಮೂರುಹೊತ್ತು ಉಂಡಾಡಿಗುಂಡಪ್ಪಗಳಾಗಿ ಕಾಲ ಕಳೆಯುವುದು ಇಷ್ಟವಾಗಿರಬೇಕು. ಅಯ್ಯಪ್ಪಸ್ವಾಮಿಯ ಯಾತ್ರೆಯ ಸಂಭ್ರಮ ಮುಂದಿನ ವರ್ಷಕ್ಕೂ ಮುಂದುವರೆಯಿತು. ಆದರೆ ಹಿಂದಿನ ವರ್ಷವಿದ್ದಷ್ಟು ನಿಷ್ಠೆ ಮಾತ್ರ ಇರಲಿಲ್ಲ. ಎರಡನೇ ವರ್ಷ ಒಂದೆರಡು ವಾರಗಳಲ್ಲಿಯೇ, ಕೆಲವು ಚಪಲಚನ್ನಿಗರಾಯರಿಗೆ ಬೇಸರವಾಗತೊಡಗಿತು. ಬೆಳಿಗ್ಗೆ, ಸಂಜೆ ಭಜನೆ ಮಾಡಿದರೆ ಮುಗಿದುಹೋಯಿತು. ಹೊತ್ತು ಕಳೆಯಲು ಎಷ್ಟು ಎಂದು ಮಾತನಾಡಲಾಗುತ್ತದೆ. ಇಸ್ಪೀಟು ಶುರು ಮಾಡಿಯೇಬಿಟ್ಟರು. ಮೊದಲಿಗೆ ದುಡ್ಡು ಕಟ್ಟಿಕೊಂಡು ಆಡುವುದು ಬೇಡವೆಂದರು. ಕೊನೆಗೆ ದುಡ್ಡೂ ಬಂತು. ಕೆಲವರು ಬೀಡಿ ಹಚ್ಚಿದರು. ಇನ್ನು ಕೆಲವರು ಸಂಜೆಯಾಗುತ್ತಿದ್ದಂತೆ ಸೆರಾಪನ್ನೂ ಕುಡಿಯುತ್ತಿದ್ದರು.

ಒಂದು ದಿನ ಸಂಜೆ ಸುಮಾರು ಏಳು ಗಂಟೆಯ ಹೊತ್ತಿಗೆ, ಇಸ್ಪೀಟು ಆಟ ಕಳೆ ಕಟಿತ್ತೋ ಏನೂ? ಜಗಳ ಶುರುವಾಗಿದೆ. ಅಷ್ಟೂ ದಿನದಿಂದ ತಡೆಹಿಡಿದುಕೊಂಡಿದ್ದ ಬಯ್ಗುಳಗಳೆಲ್ಲ ಒಮ್ಮೆಲೆ ಹೊರಗೆ ನುಗ್ಗುತ್ತಿದ್ದುದ್ದರಿಂದ ಅವರ ಕೂಗಾಟ ಹಾಸ್ಟೆಲ್ಲಿನವರೆಗೂ ಕೇಳಿಸುತ್ತಿತ್ತು. ನಾವೆಲ್ಲಾ ಎದ್ದು, ಓಡಿ ಚಪ್ಪರ ಹಾಕಿದ್ದಲ್ಲಿಗೆ ಬರುವಷ್ಟರಲ್ಲಿ ಜಗಳ ತಾರಕಕ್ಕೇರಿತ್ತು. ಮಾಲೆ ಧರಿಸಿದ್ದವನೊಬ್ಬ, ಮಾಲೆ ಧರಿಸದೇ ಕೇವಲ ಇಸ್ಪೀಟು ಆಟಕ್ಕೆ ಬಂದಿದ್ದವನೊಬ್ಬನಿಗೆ ಚಪ್ಪಲಿಯಲ್ಲಿ ಚೆನ್ನಾಗಿ ಬಾರಿಸಿಬಿಟ್ಟ! ಹೊಡೆಸಿಕೊಂಡವನು ಸುಮ್ಮನಿರುತ್ತಾನೆಯೇ? ಆತನೂ ಕೈಗೆ ಸಿಕ್ಕ ಚಪ್ಪಲಿಯಿಂದ ಮಾಲೆಧರಿಸಿದವನಿಗೂ ಬಾರಿಸಿದ! ಏನೋ ಮಹಾಪರಾಧವಾಯಿತೆಂದು ಜನರೆಲ್ಲಾ ಒಂದು ಕ್ಷಣ ಅವಕ್ಕಾದರು. ಬೇರಾವ ದುಶ್ಚಟಗಳೂ ಅವರಿಗೆ ತಪ್ಪೆನಿಸದಿದ್ದರೂ, ಮಾಲೆ ಧರಿಸಿದವನಿಗೆ ಚಪ್ಪಲಿಯಲ್ಲಿ ಹೊಡೆದಿದ್ದು ಮಹಾಪರಾಧವಾಗಿ ಕಂಡಿತ್ತು. ಜಗಳ ಒಂದು ಹಂತಕ್ಕೆ ಬರುವುದಕ್ಕೆ ಒಂದೆರಡು ಗಂಟೆಗಳೇ ಬೇಕಾಯಿತು. ರಾತ್ರಿ ಊಟದ ಹೊತ್ತಾಗಿದ್ದರಿಂದ ನಮ್ಮನ್ನೆಲ್ಲಾ ‘ವಾರ್ಡನ್ಸ್ವಾಮಿ’ ಹಾಸ್ಟೆಲ್ಲಿಗೆ ವಾಪಸ್ ಕರೆದುಕೊಂಡು ಬಂದರು. ನಂತರ ಏನಾಯಿತೋ ಗೊತ್ತಿಲ್ಲ. ಮಾರನೆಯ ದಿನ ‘ಚಪ್ಪಲಿಯಲ್ಲಿ ಹೊಡೆಸಿಕೊಂಡ ಅಯ್ಯಪ್ಪನ ಭಕ್ತ, ಮಾಲೆಯನ್ನು ತೆಗೆದು ಹಾಕಿ, ಮುಂದಿನ ವರ್ಷ ಹೊಸದಾಗಿ ಮಾಲೆಧರಿಸಿ ಬರುವುದಾಗಿ ತಪ್ಪೊಪ್ಪಿಗೆ ಹರಕೆ ಕಟ್ಟಿಕೊಂಡು ಹೊರಟುಹೋದ!’ ಎಂದು ಸುದ್ದಿಯಾಯಿತು, ಅಷ್ಟೆ.

ಕುಂದೂರುಮಠಕ್ಕೆ ಹೊರತಾದರೂ, ನಾನು ಹೈಸ್ಕೂಲಿನಲ್ಲಿದ್ದಾಗಲೇ ನಡೆದ, ಅಯ್ಯಪ್ಪಸ್ವಾಮಿ ಯಾತ್ರೆಗೆ ಸಂಬಂಧಿಸಿದ ವಿಷಯವೊಂದನ್ನು ನಾನಿಲ್ಲಿ ಹೇಳಲೇಬೆಕು. ಕುಂದೂರುಮಠದಿಂದ ಪೂರ್ವಕ್ಕೆ ಐದಾರು ಕಿಲೋಮೀಟರ್ ದೂರದಲ್ಲಿ ಒಂದು ಹಳ್ಳಿಯಿದೆ. ಅದು ನಮ್ಮ ತೋಟದಿಂದ ಕೇವಲ ಒಂದೂವರೆ ಕಿಲೋಮೀಟರ್ ಆಗಬಹುದು ಅಷ್ಟೆ. ಅಲ್ಲಿಯೂ ಈ ಅಯ್ಯಪ್ಪಸ್ವಾಮಿ ಯಾತ್ರೆಗೆ ಹೊರಟ ಗೊಂಪೊಂದಿತ್ತು. ಅಲ್ಲಿಯ ಕ್ರಾಂತಿಕಾರಕತನವೆಂದರೆ ದಲಿತರೂ ಅಯ್ಯಪ್ಪಸ್ವಾಮಿಗೆ ಹೊರಟಿದ್ದು. ಮೇಲ್ಜಾತಿಯವರೂ, ಕೆಳಜಾತಿಯವರೂ ಒಟ್ಟಿಗೆ ಒಂದೇ ಚಪ್ಪರದಲ್ಲಿ ಭಜನೆ ಮಾಡುತ್ತಾ, ಸಹಪಂಕ್ತಿ ಭೋಜನ ಮಾಡುವುದನ್ನು ಆಗ ನೋಡಬಹುದಿತ್ತು. ನಮ್ಮ ಸುತ್ತೆಲ್ಲಾ ಆಗ ಅದೊಂದು ಚರ್ಚೆಯ ವಿಚಾರವಾಗಿತ್ತು. ಬಹುಶಃ ಆಗ ಶಬರಿಮಲೆಯೊಂದೇ ದಲಿತರಿಗೆ ಮುಕ್ತ ಅವಕಾಶ ನೀಡಿದ್ದ ಸ್ಥಳವಾಗಿತ್ತೇನೋ ಅನ್ನಿಸುತ್ತದೆ.

ಹಳ್ಳಿಗಳಲ್ಲಿ ಅಸ್ಪೃಷ್ಯತೆ ಜಾರಿಯಿದ್ದ ಕಾಲವದು. ನಮ್ಮ ಮನೆಗೆ, ನಮ್ಮ ಜೊತೆ ಓದುತ್ತಿದ್ದ ಕೆಳಜಾತಿಯ ಹುಡುಗರು ಬರುತ್ತಿದ್ದುದ್ದನ್ನು ಮೊದಲೇ ಹೇಳಿದ್ದೇನೆ. ತಹಸೀಲ್ದಾರರಾಗಿದ್ದ ನಮ್ಮ ಚಿಕ್ಕಪ್ಪನ ಜೊತೆಯಲ್ಲಿ ಬರುತ್ತಿದ್ದ ಅನೇಕ ಜನ ಕೆಳಜಾತಿಯವರೂ ನಮ್ಮ ಮನೆಯ ಒಳಗೆ ಬಂದು ಹೋಗುತ್ತಿದ್ದರು. ಹೀಗಾಗಿ ಅಷ್ಟೊಂದು ಕಟ್ಟುನಿಟ್ಟಿನ ಅಸ್ಪೃಷ್ಯತೆ ನಮ್ಮ ಮನೆಯಲ್ಲಿಲ್ಲ. ಆದರೆ ನಮ್ಮ ತೋಟದಲ್ಲಿ ಕೆಲಸಕ್ಕೆ ಬರುತ್ತಿದ್ದವರು ಮಾತ್ರ, ನಾವಾಗೇ ಕರೆದರೂ ಒಳಗೆ ಬರಲು ನಿರಾಕರಿಸುತ್ತಿದ್ದರು. ಆಗ ಅವರು ಕೊಡುತ್ತಿದ್ದುದ್ದು ಎರಡು ಕಾರಣಗಳನ್ನು. ಒಂದು, ‘ನಾವೇಕೆ ನಿಮ್ಮ ಜಾತಿಯನ್ನು ಕೆಡಿಸಬೇಕು?!’ ಎಂಬುದು. ಎರಡನೆಯದು, ‘ನಾವು ಒಳಗೆ ಬಂದರೆ, ನಮಗೇ ಒಳ್ಳೆಯದಾಗುವುದಿಲ್ಲ!’ ಎಂಬುದು.

ಯಾತ್ರೆಗೆ ಹೊರಡುವ ಹಿಂದಿನ ದಿನ ಕರೆದವರ ಮನೆಗಳಿಗೆ ಹೋಗಿ, ಕಾಣಿಕೆ ಪಡೆದುಕೊಂಡು ಬರುವುದು ಈ ಗುಂಪಿನವರ ವಿಶೇಷ. ಶಬರಿಮಲೆಗೆ ಹೋಗದವರು ತೆಂಗಿನಕಾಯಿ, ಕಾಣಿಕೆ ಎಂದು ತಮ್ಮ ತಮ್ಮ ಕೈಲಾದಷ್ಟನ್ನು ಹೋಗುವವರ ಕೈಯಲ್ಲಿ ಕಳುಹಿಸುತ್ತಿದ್ದರು. ಗುಂಪಿನಲ್ಲಿ ಬರುವ ‘ಸ್ವಾಮಿ’ಗಳನ್ನು, ಜಾತಿಯ ಕಾರಣದಿಂದ ಒಳಗೆ ಬರಬೇಡಿರೆಂದು ಹೇಳುವಂತಿಲ್ಲ. ಆ ಹಳ್ಳಿಯ ಜನತೆಯೂ ಆಗ ಅದನ್ನು ಮಹಾಪರಾಧವೆಂದು ಪರಿಗಣಿಸದೆ, ಎಲ್ಲಾ ಜಾತಿಯವರನ್ನೂ ಒಳಗೆ ಸೇರಿಸಿ, ಸತ್ಕರಿಸುತ್ತಿದ್ದರು. ಯಾತ್ರೆ ಮುಗಿಸಿ ಬಂದ ಮೇಲೆ ಯಥಾಪ್ರಕಾರ ಅಸ್ಪೃಷ್ಯತೆ ಮತ್ತೆ ಜಾರಿಗೆ ಬಂದಿದ್ದು ಮಾತ್ರ ದುರಾದೃಷ್ಟಕರ. ಇನ್ನೊಂದು ಆಘಾತಕಾರಿ ವಿಷಯವೆಂದರೆ, ‘ಮಾಲೆ ಧರಿಸಿಯಾದರೂ ಮೇಲ್ಜಾತಿಯವರ ಮನೆಯೊಳಗೆಲ್ಲಾ ಓಡಾಡಿ ಬಂದೆ’ ಎಂದು ಕೆಳಜಾತಿಯ ಹುಡುಗನೊಬ್ಬ ಹೇಳಿದ್ದು, ಮೇಲ್ಜಾತಿಯವರನ್ನು ಕೆರಳಿಸಿಬಿಟ್ಟಿತ್ತು. ಆದರೆ ಈ ಕಾರಣದಿಂದಾಗಿ ಯಾವುದೇ ಅಹಿತಕರ ಘಟನೆ ನಡೆಯದಿದ್ದುದ್ದು ಮಾತ್ರ ಒಳ್ಳೆಯ ಬೆಳವಣಿಗೆಯಾಗಿತ್ತು. ಹಾಗೆ ಜಂಭ ಕೊಚ್ಚಿಕೊಂಡವನು, ಆಗಾಗ ನಮ್ಮ ತೋಟಕ್ಕೆ ಕೆಲಸಕ್ಕೆ ಬರುತ್ತಿದ್ದವನೂ, ನಾವು ಒಳಗೆ ಬರಬಹುದೆಂದು ಹೇಳಿದರೂ ಬರದೆ, ಮೊದಲು ಹೇಳಿದ ಎರಡು ಕಾರಣಗಳನ್ನು ಕೊಟ್ಟವರಲ್ಲಿ ಒಬ್ಬನಾಗಿದ್ದ!

Tuesday, September 08, 2009

T20=ತೇಜಸ್ವಿ ಟ್ವೆಂಟಿ : ಸಹಜಕೃಷಿ

ಶೀರ್ಷಿಕೆ ನೋಡಿ ‘ಇದೇನಪ್ಪ ತೇಜಸ್ವಿಗೂ 20:20 ಕ್ರಿಕೆಟ್ಟಿಗೂ ಏನು ಸಂಬಂಧ’ ಎಂದು ತಲೆಕೆರೆದುಕೊಳ್ಳಬೇಡಿ. ಇಂದು (08.09.2009) ನಮ್ಮ ತೇಜಸ್ವಿಯವರ 72ನೇ ಹುಟ್ಟಿದ ಹಬ್ಬ. ನನ್ನ ಬ್ಲಾಗಿನಲ್ಲಿ ಅವರ ಬಗ್ಗೆ ಏನಾದರೂ ಬರೆಯಬೇಕೆಂಬ ಆಸೆ ನನಗೆ. ಆದರೆ ಏನು ಬರೆಯುವುದು? ತೇಜಸ್ವಿ ಮತ್ತು ಅವರ ಸಾಹಿತ್ಯದ ನಿತ್ಯವಿದ್ಯಾರ್ಥಿಯಾದ ನನಗೆ ಅವರ ಬಗ್ಗೆ ಬರೆಯುವುದೆಂದರೆ ಭಾರೀ ಸಂಭ್ರಮ ಜೊತೆಗೇ ಭಯವೂ ಕೂಡಾ! ಬರೆಯುವುದಕ್ಕಿಂತ ಅವರ ಸಾಹಿತ್ಯವನ್ನು ಓದುತ್ತಾ ಮನಸ್ಸಿನಲ್ಲಿಯೇ ಅನುಸಂಧಾನ ಮಾಡಿ ಆನಂದಿಸುವುದೇ ನನಗೆ ಹೆಚ್ಚು ಇಷ್ಟ.
ಅವರ ಪುಸ್ತಕಗಳನ್ನು ಓದುವಾಗ ನನಗೆ ‘ಪಂಚಿಂಗ್ ಲೈನ್’ ಎಂದು ಕಂಡು ಬಂದ ವಾಕ್ಯಗಳನ್ನು ಅಡಿಗೆರೆ ಎಳೆಯುವುದು, ಬರೆದಿಟ್ಟುಕೊಳ್ಳುವುದು ಮಾಡಬೇಕೆಂದುಕೊಳ್ಳುತ್ತಿದ್ದೆ. ಆದರೆ ಓದುವಾಗ ಆ ವಿಷಯವೇ ಮರೆತು ಅವರ ಕೃತಿಗಳೊಳಗೆ ನಾನು ಇಳಿದುಬಿಡುತ್ತಿದ್ದೆ. ಇಲ್ಲ ಬಲವಂತವಾಗಿ ಅಡಿಗೆರೆ ಎಳೆಯಲು ಹೊರಟರೆ, ಓದುವುದೇ ನಿಂತುಹೋಗುತ್ತಿತ್ತು; ಜೊತೆಗೆ ಎಲ್ಲವೂ ಪಂಚಿಂಗ್ ಲೈನ್‌ಗಳಂತೆಯೇ ಕಾಣುತ್ತಿದ್ದವು! ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಮರುಓದಿಗೆ ಒಳಪಡಿಸುವಾಗ ಈ ರೀತಿಯ ಚಡಪಡಿಕೆ ಕಡಿಮೆಯಾಗುತ್ತಿರುವುದನ್ನು ನಾನು ಗಮನಿಸಿದ್ದೇನೆ. ಆದ್ದರಿಂದ ಇತ್ತೀಚಿಗೆ ನಾನು ಮತ್ತೆ ಓದಿದ ‘ಸಹಜಕೃಷಿ’ ಪುಸ್ತಕದಲ್ಲಿ ಈ ಅಡಿಗೆರೆ ಎಳೆಯುವ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಯಶಸ್ಸು ನನ್ನದಾಗಿದೆ. ಹಾಗೆ ಅಡಿಗೆರೆ ಎಳೆದ ಸಾಲುಗಳಲ್ಲಿ ಇಪ್ಪತ್ತನ್ನು ಆಯ್ದು ಇಂದು ನಿಮ್ಮೆದುರಿಗೆ ಇಡುತ್ತಿದ್ದೇನೆ. ಅದಕ್ಕೇ ಈ T20=ತೇಜಸ್ವಿ ಟ್ವೆಂಟಿ!
ಸಹಜಕೃಷಿಯನ್ನು ಓದದವರಿಗೆ ಈ ಸಾಲುಗಳನ್ನು ಓದಿ ಮೂಲಕೃತಿಯನ್ನು ಓದಬೇಕು ಎನ್ನಿಸಿದರೆ ನಾನು ಧನ್ಯ. ಈಗಾಗಲೇ ಸಹಜಕೃಷಿಯನ್ನು ಓದಿದವರೂ ಮತ್ತೊಮ್ಮೆ ಸಹಜಕೃಷಿಯನ್ನು ಓದುವಂತಾದರೆ ಡಬಲ್ ಖುಷಿ ನನ್ನದು.

ಓದುಗರಲ್ಲಿ ನನ್ನದೊಂದು ವಿನಂತಿ. ಇಲ್ಲಿನ ವಾಕ್ಯಗಳನ್ನು ಮೂಲಕೃತಿಯಿಂದ ಬೇರ್ಪಡಿಸಿ ಅರ್ಥೈಸಿಕೊಳ್ಳುವ ಪ್ರಯತ್ನ ಮಾಡಬಾರದು. ಕೆಲವೊಂದು ವಾಕ್ಯಗಳನ್ನು ಪ್ರತ್ಯೇಕವಾಗಿ ಅರ್ಥೈಸಿಕೊಂಡಾಗ ‘ಇದೇನು ಹೀಗೆ?’ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಆಗ ನಮಗೆ ತೋಚಿದ ಸಮಾಧಾನವನ್ನು ನಾವು ಆರೋಪಿಸಿಕೊಂಡು ಇನ್ನಷ್ಟು ಅನರ್ಥ ಮಾಡಿಕೊಳ್ಳುತ್ತೇವೆ. ಆದ್ದರಿಂದ, ಅಂತಹ ಸಂದಿಗ್ಧತೆ ತಲೆದೋರಿದಲ್ಲಿ, ಮೂಲಕೃತಿಯನ್ನು ಓದಿ ಅದರ ಹಿನ್ನೆಲೆಯಲ್ಲಿಯೇ ಅರ್ಥೈಸಿಕೊಳ್ಳಬೇಕು. 
  • ಭಾರತದ ಆಧುನೀಕರಣದ ಕತೆಯೆಂದರೆ ಒಬ್ಬರ ಅನ್ನ ಇನ್ನೊಬ್ಬರು ಕಿತ್ತುಕೊಂಡ ಕತೆ.
  • ದಿನವೂ ನೂರಾರು ವಸ್ತುಗಳನ್ನು ಉತ್ಪಾದಿಸಿ ಜಾಹಿರಾತುಗಳ ಮುಖಾಂತರ ಪ್ರಚೋದಿಸುವ ಆಧುನಿಕ ಕೈಗಾರಿಕೆಗಳಿಗೆ   ಸರಳ ಜೀವನ ಸೋಂಕು ರೋಗದಂತೆ ಭಯಾನಕವಾಗಿ ಕಾಣುತ್ತದೆ.
  • ಪೃಥ್ವಿಯ ಮೇಲೆ ಮಾನವ ಉದಿಸುವುದಕ್ಕೂ ಮೊದಲೇ ರೂಪುಗೊಂಡ ಈ ಗಿಡಮರಗಳಿಗೆ ಮಾನವನ ಕೃತಕ ಕೃಷಿಯ ಅಗತ್ಯವಿಲ್ಲ.
  • ಭೂಮಿ ಮಿಲಿಯಗಟ್ಟಲೆ ವರ್ಷಗಳಿಂದ ಜೀವಸೃಷ್ಟಿ ಮಾಡುತ್ತಾ ಬಂದ ಅದಮ್ಯ ಚೈತನ್ಯದ ಅಕ್ಷಯ ಪಾತ್ರೆ.
  • ಹಾಲು ಅಗತ್ಯವಾದರೆ ಹಾಲಿಗಾಗಿಯೇ ಇರುವ ತಳಿಗಳನ್ನು ಸಾಕಿ ಅವುಗಳಿಗೆ ಅಗತ್ಯವಾದ ಮೇವನ್ನು ರೈತನೇ ಬೆಳೆದು ನೋಡಿಕೊಳ್ಳುವುದು ವಿಹಿತವೇ ಹೊರತು ಒಣ ಹುಲ್ಲು ತಿಂದು ಮುರುಟಿಕೊಂಡ ಈ ಕ್ಷುದ್ರ ದನಗಳ ಮಂದೆಗಳಿಂದ ರೈತರು ಮುಕ್ತರಾಗುವುದೇ ಒಳ್ಳೆಯದು.
  • ಬುದ್ಧ, ಶಂಕರರಿಂದ ಹಿಡಿದು ಇಂದಿನವರೆಗೆ ಅನೇಕಾನೇಕ ಮಾಹಾನುಭಾವರು, ಪೂಜ್ಯರು ಭಾರತದಲ್ಲಿ ಈಗಾಗಲೇ ಯಥೇಚ್ಛವಾಗಿ ಇರುವುದರಿಂದ ಈ ಪೂಜ್ಯರ ಸಮುದಾಯಕ್ಕೆ ಫುಕೋಕಾ ಒಬ್ಬರನ್ನು ಸೇರಿಸಿಸುವುದು ನಮ್ಮ ರೈತ ಕೋಟಿಗೂ, ಫುಕೋಕಾರವರಿಗೂ ನಾನು ಅನ್ಯಾಯ ಮಾಡಿದಂತೆ.
  • ಭಾರತದ ರೈತರಲ್ಲಿ ಕೆಲವರು ಎಂಥ ದುರಾಸೆಯವರೂ ಲೋಭಿಗಳೂ ಆಗಿದ್ದಾರೆಂದರೆ ಸಬ್ಸಿಡಿ ಸಾಲ ಎಂದರೆ ಸಾಕು ಅದು ಒಳ್ಳೆಯದೋ ಕೆಟ್ಟದ್ದೋ ಎಂದೂ ಯೋಚಿಸದೆ ನುಂಗಿ ನೀರು ಕುಡಿಯುತ್ತಾರೆ.
  • ಒಂದು ವಿಷ ಒಂದು ಜೀವ ಸಮುದಾಯವನ್ನು ಮಾತ್ರ ಕೊಂದು ಇನ್ನೊಂದನ್ನು ಬಿಡುತ್ತದೆ ಎಂದು ಹೇಳುವ ಸಿದ್ಧಾಂತವೇ ತಪ್ಪು.
  • ಕೃಷಿಕ ಭಾರತದಲ್ಲಿ ಮನಸ್ಸು, ಆತ್ಮ, ವ್ಯಕ್ತಿತ್ವಗಳಿಲ್ಲದ ಕೇವಲ ಉತ್ಪಾದಕನಾಗಿ ಮಾತ್ರ ಅಸ್ತಿತ್ವ ಪಡೆದಿದ್ದಾನೆ.
  • ನಮ್ಮ ಸರ್ಕಾರಗಳು ರೈತರ ಉತ್ಪನ್ನಗಳಿಗೆ ನ್ಯಾಯಯುತ ಲಾಭಕರ ಬೆಲೆ ನೀಡುವುದೊಂದನ್ನುಳಿದು ಮಿಕ್ಕಿದ್ದನ್ನೆಲ್ಲಾ ಮಾಡುತ್ತದೆ. ಕೃಷಿ ಉತ್ಪಾದನೆ ಹೆಚ್ಚಿಸಲು ಅತಿ ಸೂಕ್ತ ಮಾರ್ಗವೆಂದರೆ ರೈತನಿಗೆ ಲಾಭಕರ ಬೆಲೆಯೇ ಹೊರತು ಮಿಕ್ಕುದೆಲ್ಲ ನೀರಿನಲ್ಲಿ ಹೋಮ ಮಾಡಿದಂತೆ.
  • ಟ್ರ್ಯಾಕ್ಟರ್ ಸಾಲ, ಟಿಲ್ಲರ್ ಸಾಲ, ಗೋಬರ್ ಗ್ಯಾಸ್ ಸಾಲ, ಪಂಪ್ ಸೆಟ್ ಸಾಲ, ಸ್ಪ್ರೆಯರ್ ಸಾಲ ಹೀಗೇ ನೂರಾರು. ರೈತ ಒಂದು ತೀರಿಸಲು ಇನ್ನೊಂದು ಸಾಲಕ್ಕೆ ನೆಗೆಯುತ್ತಾ ಬಾಣಲೆಯಿಂದ ಬಾಣಲೆಗೆ ಹಾರುತ್ತಿದ್ದಾನೆ. ಬಾಣಲೆಗಳ ಸರಣಿ ಮುಗಿದು ಬೆಂಕಿಗೆ ಯಾವಾಗ ಹಾರುತ್ತಾನೋ ನೋಡಬೇಕಾಗಿದೆ.
  • ದಿಲ್ಲಿಯಲ್ಲಿ ಕುಳಿತು ಹಳ್ಳಿಗರ ಉದ್ಧಾರಕ್ಕೆ ಶಿಫಾರಸ್ ಮಾಡುವ ಕ್ರಮದಿಂದಲೇ ಯೋಜನೆಗಳು ಹಾಳಾದವು. ಹಳ್ಳಿಯವರ ಪೂರ್ವಾರ್ಜಿತ ವಿವೇಕ ಹಾಗೂ ಉದ್ಯಮಗಳೂ ನಾಶವಾದವು.
  • ಒಂದು ರಾಷ್ಟ್ರದ, ಸರ್ಕಾರದ ಸಂಕ್ಷಿಪ್ತ ರೂಪವೇ ಪ್ರಜೆ.
  • ಹುಲ್ಲು ಬೆಳೆದ ಭೂಮಿ ಮಾತ್ರ ದನ ಎಷ್ಟು ಮೆಯ್ದರೂ ಸಾರಹೀನವಾಗುವುದಿಲ್ಲ. ಧಾನ್ಯ ತರಕಾರಿ ಬೆಳೆದ ಭೂಮಿ ಮಾತ್ರ ಬಂಜರು ಬೀಳುತ್ತದೆಯೇ?
  • ನಿರ್ದಿಷ್ಟ ಹಾಗೂ ಖಚಿತ ಅರ್ಥ ಉದ್ಧೇಶಗಳಿಲ್ಲದ ಈ ಶಾಸ್ತ್ರ ಆಚಾರಗಳಿಂದ ಇವತ್ತಿನ ಅತಿ ಸಂಕೀರ್ಣ ಆಧುನಿಕ ಜಗತ್ತಿನ ಸವಾಲುಗಳನ್ನು ಎದುರಿಸಬಹುದೆಂದು ನಾನು ತಿಳಿದಿಲ್ಲ.
  • ಒಂದು ಸಾರಿ ನಾವು ವೈಜ್ಞಾನಿಕ ವಿವೇಚನೆಯನ್ನು ತ್ಯಜಿಸಿ ಶಾಸ್ತ್ರಚಾರಗಳ ಅನುಸರಣೆಗಿಳಿದೆವೆಂದರೆ ಅಲ್ಲಿಗೆ ಅಂಧಶ್ರದ್ಧೆಯ ಅಂಕುರಾರ್ಪಣೆಯಾಯ್ತೆಂದೇ ತಿಳಿಯಿರಿ.
  • ಕೈಗಾರಿಕೀಕರಣದ ಮುಂಚೂಣಿಯಲ್ಲಿರುವ ಮುಂದುವರೆದ ದೇಶಗಳಲ್ಲಿ ವೈಜ್ಞಾನಿಕ ಆಧಾರದ ಮೇಲೆಯೇ ರಾಸಾಯನಿಕ ಕೃಷಿಯ ಅನಿಷ್ಟಗಳ ವಿರುದ್ಧ ಆಂದೋಳನ ಸಂಭವಿಸುತ್ತಿರುವಾಗ ನಾವೇಕೆ ಗೊಡ್ಡು ಸಂಪ್ರದಾಯಗಳ ಬೆಂಬಲ ತೆಗೆದುಕೊಳ್ಳಬೇಕು?
  • ಒಂದು ಸಿಗರೇಟನ್ನಾಗಲಿ, ನಶ್ಯವನ್ನಾಗಲಿ ಬಿಡುವುದಕ್ಕೆ ಸಾಧ್ಯವಾಗದ ನಮ್ಮಂಥ ಕ್ಷುದ್ರಜೀವಿಗಳಿಗೆ ಪರಂಪರಾಗತವಾಗಿ ಬೆಳೆದು ಬಂದಿರುವ ರೈತನ ಅಭ್ಯಾಸಗಳನ್ನು ಬಿಡುವಂತೆ ಹೇಳುವ ನೈತಿಕ ಸ್ಥೈರ್ಯ ಸಹ ಕಡಿಮೆಯಾಗಿದೆ.
  • ಸಹಜ ಕೃಷಿ ಪದ್ಧತಿಯಿಂದ ಬೆಳೆದು ತೋರಿಸುವ ಒಂದೇ ಒಂದು ಎಕರೆ ಹೊಲ ಅಥವಾ ಗದ್ದೆ ಸಹಜ ಕೃಷಿ ಆಂದೋಳನದ ಕಾಳ್ಗಿಚ್ಚಿಗೆ ಕಿಡಿಯಾಗುತ್ತದೆ. ಈ ಕ್ರಾಂತಿಯನ್ನು ಸಾದ್ಯಮಾಡಿ ತೋರಿಸುವ ಮಹಾನುಭಾವ ಯಾರಿರಬಹುದೆಂದು ನಾನು ಕುತೂಹಲದಿಂದ ಯೋಚಿಸುತ್ತೇನೆ!
  • ಫುಕೋಕಾ ತಮ್ಮ ಗುರಿಸಾಧನೆಯಲ್ಲಿ ಗಾಂಧಿ, ಲೋಹಿಯಾ ಜೇಪಿ ಮುಂತಾದವರಿಗಿಂತ ಹೆಚ್ಚು ಸಫಲರಾಗಿದ್ದಾರೆ. ಬಹುಶಃ ಇದಕ್ಕೆ ಕಾರಣ ಫುಕೋಕಾ ಕಾರ್ಯಸಾಧನೆಯೆಲ್ಲ ಮರ ಗಿಡಗಳ ಬಳಿಯೇ ಆದ್ದರಿಂದ, ಸುಳ್ಳು ಹೇಳುವ, ದ್ರೋಹ ಬಗೆಯುವ ಮಾನವರಿಂದ ಕೂಡಿದ ಸಾಮಾಜಿಕ ಪರಿಸರದಲ್ಲಿ ಗಾಂಧಿ, ಲೋಹಿಯಾ, ಜೇಪಿ ಮುಂತಾದವರು ಅನುಭವಿಸಿದ ತೊಂದರೆಗಳನ್ನು ಅನುಭವಿಸಿರಲಾರರು.
ಪುಸ್ತಕದ ಹೆಸರು : ಸಹಜಕೃಷಿ
ಲೇಖಕರು : ಕೆ.ಪಿ. ಪೂರ್ಣಚಂದ್ರ ತೇಜಸ್ವಿ
ಪ್ರಕಾಶಕರು : ಪುಸ್ತಕ ಪ್ರಕಾಶನ, ಮೈಸೂರು.
                   ೧೯೯೧ರಲ್ಲಿ ಮೊದಲ ಮುದ್ರಣವಾಗಿದ್ದ ಈ ಕೃತಿ ೨೦೦೪ರ ಹೊತ್ತಿಗೆ ಹತ್ತನೇ ಮುದ್ರಣ ಕಂಡಿತ್ತು.

ಕೃತಿಯ ಬೆನ್ನುಡಿಯಿದು:

ಫುಕೋಕಾ ತಮ್ಮ ಸಹಜ ಕೃಷಿ ಹಿನ್ನೆಲೆಯಲ್ಲಿ ಮಂಡಿಸುವ ತತ್ವ ಮತ್ತು ಸಿದ್ಧಾಂತಗಳು ಕೇವಲ ರೈತರ ಕೃಷಿ ಕ್ಷೇತ್ರಕ್ಕೆ ಮಾತ್ರವೇ ಸೀಮಿತವಾಗಿರದೆ ಕಲೆ, ಸಾಹಿತ್ಯ, ಸಂಗೀತ ಮತ್ತು ತತ್ವಮೀಮಾಂಸೆಯ ಮೇಲೆ ದೂರಗಾಮಿಯಾದ ಪರಿಣಾಮಗಳನ್ನು ಬೀರುವುದರಲ್ಲಿ ಸಂಶಯವಿಲ್ಲ. ಸಹಜ ಕೃಷಿ ರಾಸಾಯನಿಕ ಕೃಷಿಯಂತೆ ಆಹಾರ ಬೆಳೆಯುವ ಸಿದ್ಧಸಮೀಕರಣವನ್ನು ನೀಡುವುದಿಲ್ಲ. ಅದು ಒಂದು ಜೀವನ ಕ್ರಮ, ಆಲೋಚನಾ ವಿಧಾನ, ಆಧ್ಯಾತ್ಮಿಕ ದೃಷ್ಟಿಯನ್ನೂ ಬೋಧಿಸುತ್ತದೆ. ಆದರೆ ರಾಸಾಯನಿಕ ಕೃಷಿಯಿಂದ ತೊಂದರೆಗೊಳಗಾಗಿರುವ ಭಾರತದ ಕೃಷಿ ಕ್ಷೇತ್ರಕ್ಕೆ ಮುಖ್ಯವಾಗಿ ಬೇಕಾಗಿರುವುದು ಅವರ ಕೃಷಿ ಪದ್ಧತಿ. ಅದನ್ನು ಪ್ರಮುಖವಾಗಿಟ್ಟುಕೊಂಡು ಇಲ್ಲಿ ಸಹಜ ಕೃಷಿಯನ್ನು ವಿವೇಚಿಸಲಾಗಿದೆ.

Saturday, September 05, 2009

ಶಿಕ್ಷಕರ ದಿನದ ವಿಶೇಷ ಸಣ್ಣಕಥೆ : ಬಸವ ಮತ್ತು ದೇವರು

ಢಣ ಢಣ, ಢಣ ಢಣ ಎಂದು ಲಾಂಗ್ ಬೆಲ್ಲು ಹೊಡೆದುದ್ದೇ ತಡ, ಬಸವ ದಡಕ್ಕನೆದ್ದು ಕುಳಿತುಕೊಂಡ. ಸುಮಾರು ಒಂದು ಗಂಟೆಗಳಿಂದ ಮಿಂಚು ಗುಡುಗುಗಳ ಬಗ್ಗೆ ಅದೇ ಧಾಟಿಯಲ್ಲಿ ಪಾಠ ಮಾಡುತ್ತಿದ್ದ ಕೇಡಿ ಮಾಸ್ಟರರ ಗುಡುಗಿನಂತ ದನಿಗೂ ಎಚ್ಚರವಾಗದಿದ್ದ ಬಸವ ಲಾಂಗ್ ಬೆಲ್ ಕೇಳಿ ಎಚ್ಚರವಾಗಿದ್ದು ಹಿಂದಿನ ಡೆಸ್ಕಿನವರಿಗೆ ಬಿಟ್ಟು ಬೇರಾರಿಗೂ ತಿಳಿಯಲಿಲ್ಲ. ತನ್ನ ಅತಿರೇಕದ ವರ್ತನೆಗಳಿಂದ ವಿಜ್ಞಾನದ ಮಾಸ್ಟರ್ ಕೆ. ದೇವರಾಜು ಅನ್ನುವವರು ಹುಡುಗರ ಬಾಯಲ್ಲಿ ಕೇಡಿ ಆಗಿ ಚಿರಪರಿಚಿತರಾಗಿದ್ದವರು. ಎಲ್ಲಾ ಕ್ಲಾಸುಗಳಿಗೂ ಮುಂದಿನ ಡೆಸ್ಕಿನಲ್ಲಿ ಕುಳಿತುಕೊಳ್ಳುತ್ತಿದ್ದ ಬಸವ ಕೇಡಿ ಕ್ಲಾಸಿಗೆ ಮಾತ್ರ ಹಿಂದಿನ ಬೆಂಚಿಗೆ ಹೋಗುತ್ತಿದ್ದ. ಇಂದು ಬೆಳಿಗ್ಗೆಯಿಂದ ಹೊಟ್ಟೆಗೆ ಏನೂ ಬೀಳದಿದ್ದರಿಂದಲೂ, ಬೆಳಿಗ್ಗೆ ಹೆಡ್ಮಿಸ್ ನಾಳೆ ಫೀಸ್ ಕಟ್ಟದಿದ್ದರೆ ಕ್ಲಾಸಿಗೆ ಬರಬೇಡ ಎಂದಿದ್ದರಿಂದಲೂ ಬಸವ ಹೆಚ್ಚು ಸುಸ್ತಾಗಿ ಹೋಗಿದ್ದ. ಆದ್ದರಿಂದಲೇ ಹಿಂದಿನ ಬೆಂಚಿನಲ್ಲಿ, ಹೊಟ್ಟೆಯಲ್ಲಿ ನಡೆಯುತ್ತಿದ್ದ ಕೋಲಾಹಲವನ್ನು ಹತ್ತಿಕ್ಕಲೋ ಎಂಬಂತೆ ಒಂದು ಕೈಯನ್ನು ಹೊಟ್ಟೆಗೆ ಕೊಟ್ಟುಕೊಂಡು ನಿದ್ದೆ ಹೋಗಿದ್ದ. ಹುಡುಗರ ಸಂಖ್ಯೆ ನೂರರ ಗಡಿ ದಾಟಿದ್ದರಿಂದ ವಿಜ್ಞಾನದ ಮಾಸ್ಟರವರ ಕಣ್ಣಿಗೆ ಬೀಳುವ ಭಯವಿರಲಿಲ್ಲ.

ಹುಡುಗರೆಲ್ಲ ‘ಹೋ’ ಎಂದು ಹೊರಗೆ ಹೋಗಿಯಾಗಿತ್ತು. ಬಸವ ಎದ್ದು ನಿಲ್ಲಲು ಹೋದರೆ ಕಾಲುಗಳು ಮುಷ್ಕರ ಹೂಡುತ್ತಿದ್ದವು. ‘ಗತಿಯಿಲ್ಲದಿದ್ದ ಮೇಲೆ ಯಾವ್ದಾದ್ರು ಗೌರ್ನಮೆಂಟ್ ಸ್ಕೂಲಿಗೆ ಹೋಗ್ಬೇಕಾಗಿತ್ತು’ ಎಂದಿದ್ದ ಹೆಡ್ಮಿಸ್ಸಿನ ಮಾತು ನೆನಪಿಗೆ ಬಂದು, ‘ಯಾಕೆ? ಬಡವರೇನು ಒಳ್ಳೆ ಸ್ಕೂಲಲ್ಲಿ ಓದಬಾರದಾ?’ ಎನ್ನುವ ತನ್ನ ಪ್ರಶ್ನೆಯನ್ನು ಶಬ್ದ ರೂಪಕ್ಕೆ ಇಳಿಸಲಾಗದ್ದಕ್ಕೆ ಈಗ ಬೇಜಾರು ಮಾಡಿಕೊಂಡ. ಹೇಗೋ ಧೈರ್ಯವಹಿಸಿ ಎದ್ದು ಹೆಗಲಿಗೆ ಬ್ಯಾಗನ್ನು ತೂಗಿಸಿಕೊಂಡು ಹೊರಬಿದ್ದವನ ಕಣ್ಣಿಗೆ ಬಿದ್ದವರು ಕನ್ನಡ ಮಿಸ್ಸು ಅನಿತ. ಈತನ ತೂಗಡಿಕೆಯ ನಡಿಗೆಯನ್ನು ಗಮನಿಸಿದ ಅನಿತ ‘ಏಕೊ ಬಸವ ಹುಷಾರಿಲ್ಲವಾ? ನಿದ್ದೆ ಮಾಡಿದಂತೆ ಕಾಣುತ್ತೀಯಾ’ ಎಂದಾಗ ಬಸವನಿಗೆ ಸಕತ್ ಆಶ್ಚರ್ಯವಾಯಿತು. ನಾನು ನಿದ್ದೆ ಮಾಡುತ್ತಿದ್ದುದ್ದು ಕೇಡಿ ಮಾಸ್ಟರಿಗೇ ಗೊತ್ತಾಗಲಿಲ್ಲ! ಆದರೆ ಈ ಅನಿತ ಮಿಸ್ಸಿಗೆ ಗೊತಾದುದ್ದು ಹೇಗೆ? ಎಂದು ತಲೆಕೆಡಿಸಿಕೊಂಡ ಬಸವ ‘ಇಲ್ಲ ಮಿಸ್. ಹೊಟ್ಟೆ ಹಸಿವು’ ಎಂದು ಅಪ್ರಯತ್ನಪೂರ್ವಕವಾಗಿ ಹೇಳಿ ‘ಇಲ್ಲ ಮಿಸ್. ನನ್ಗೇನು ಆಗಿಲ್ಲ’ ಎಂದುಬಿಟ್ಟ ಅದೇ ಉಸಿರಿನಲ್ಲಿ. ಕ್ಷಣಮಾತ್ರವೂ ಯೋಚಿಸದೆ ‘ಒಂದ್ನಿಮಿಷ ಇರು ಬಂದೆ’ ಎಂದು ಮತ್ತೆ ಸ್ಟಾಫ್ ರೂಮಿನ ಕಡೆಗೆ ಹೋದರು. ಅದೇ ರೂಮಿನಿಂದ ತಮ್ಮ ಸೀಮೇಸುಣ್ಣದ ಕೈಯನ್ನು ತೊಳೆಯಲು ಬಂದ ಕೇಡಿ ಮಾಸ್ಟರ್ ‘ಏಕೊ ಬಡವಾ. ನನ್ನ ಕ್ಲಾಸಿಗೆ ಬಂದಿರ್ಲಿಲ್ಲ?’ ಎಂದು ಗುಡುಗಿದರು. ತೊಡೆಯಲ್ಲುಂಟಾದ ನಡುಕವನ್ನು ತಡೆಯುತ್ತ ‘ಇಲ್ಲ ಸಾರ್. ಬಂದಿದ್ದೆ ಸಾರ್. ನಿಮ್ಮ ಗುಡುಗು ಮಿಂಚು ಕೇಳಿದೆ ಸಾರ್’ ಎಂದು ತಡಬಡಿಸಿದ. ತಾವು ಕೇಳಿದ್ದ ಪ್ರಶ್ನೆಯನ್ನು ಆಗಲೇ ಮರೆತಿದ್ದ ಕೇಡಿ ಮಾಸ್ಟರ್, ಬಸವನನ್ನು ಒಂದು ಪ್ರಾಣಿಯೋ ಎಂಬಂತೆ ನೋಡಿ ಒಳಗೆ ಹೋದರು. ಆಗ ಹೊರಗೆ ಬಂದ ಅನಿತ ಮಿಸ್, ‘ತಗಳೊ. ಇಲ್ಲಿ ಒಂದ್ನಾಲ್ಕು ಬಿಸ್ಕೆಟ್ ಇದೆ ತಿಂದ್ಕೊ. ಹಾಗೆ ಅಲ್ಲಿ ಎಲ್ಲಾದ್ರು ಕಾಫಿನೊ ಟೀನೊ ಕುಡ್ಕೊ’ ಎಂದು, ಒಂದು ಅರ್ಧ ಖಾಲಿಯಾಗಿದ್ದ ಬಿಸ್ಕೆಟ್ ಪ್ಯಾಕನ್ನು, ಐದು ರೂಪಾಯಿ ನೋಟನ್ನು ಕೊಟ್ಟರು. ಅದನ್ನು ತಗೆದುಕೊಳ್ಳುತ್ತಲೇ, ನಮಸ್ಕರಿಸುವವನಂತೆ ತಮ್ಮ ಮುಖವನ್ನೇ ನೋಡಿದ ಬಸವನ ತಲೆಯನ್ನು ಸವರಿ ಮುಗುಳ್ನಕ್ಕು ಹೊರಟರು. ಅನಿತ ಮೇಡಂ ಬಸವನಿಗೆ ತಿಂಡಿ ಕೊಡುವುದು ಇದೇ ಮೊದಲೇನಾಗಿರಲಿಲ್ಲ. ವಾರಕ್ಕೆ ಒಂದೆರಡು ದಿನವಾದರೂ ಆತನಿಗೆ ಕರೆದು ತಿಂಡಿ ಕೊಡುತ್ತಿದ್ದರಲ್ಲದೆ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿಯೂ ತಿಂಡಿ ಮುಂತಾದವನ್ನು ಕೊಡುತ್ತಿದ್ದರು. ಕೆಲವು ಬಾರಿ ನೋಟ್ ಪುಸ್ತಕಗಳನ್ನು, ಓದಲು ಕಾಮಿಕ್ಸ್ ಪುಸ್ತಕಗಳನ್ನು ಕೊಟ್ಟಿದ್ದರು. ಆದರೆ ಎಂದೂ ತನ್ನನ್ನು ಕೇಡಿ ಮಾಸ್ಟರಂತೆ ‘ಬಡವಾ’ ಎಂದಾಗಲಿ, ಹೆಡ್ಮಿಸ್ಸಿನಂತೆ ‘ಗತಿಯಿಲ್ಲದವನು’ ಎಂದಾಗಲಿ ಕರೆದಿರಲಿಲ್ಲ. ಅನಿತ ಮೇಡಂ ಮರೆಯಾಗುವವರೆಗೂ ನೋಡುತ್ತಿದ್ದ ಬಸವನಿಗೆ ‘ಅನಿತ ಮಿಸ್ ದೇವರೇ ಇರ್ಬೇಕು. ನಾನು ನಿದ್ದೆ ಮಾಡಿದ್ದು ಅವರಿಗೆ ಗೊತ್ತಾಗುತ್ತೆ. ನಾನು ಪಾಠ ಓದುವಾಗ ತಪ್ಪಾದ್ರೆ ತಕ್ಷಣ ಅವ್ರಿಗೆ ಗೊತ್ತಾಗುತ್ತೆ. ನಾನು ಹಸ್ಗೊಂಡಿದ್ರೆ ಗೊತಾಗುತ್ತೆ. ದೇವ್ರಿಗೆ ಎಲ್ಲಾ ಗೊತ್ತಾಗುತ್ತೆ ಅಂತೆ ಅವ್ವ ಹೇಳ್ತಿರ್ತಾಳೆ’ ಅಂದುಕೊಂಡ ಬಸವನಿಗೆ ತನ್ನ ಅವ್ವ, ತಂಗಿ ಪುಟ್ಟಿಯ ನೆನಪು ಬಂದು ಮನೆಯ ಕಡೆಗೆ ಹೊರಟ. ಕೈಯಲ್ಲಿದ್ದ ಬಿಸ್ಕೆಟ್ಟನ್ನು ತಿನ್ನಬೇಕನಿಸಲಿಲ್ಲ. ಮನೆಗೆ ಹೋಗಿ ತಂಗಿಗೂ ಒಂದೆರಡು ಕೊಟ್ಟು ತಿನ್ನ ಬೇಕು. ಅವಳೂ ಬೆಳಿಗ್ಗೆಯಿಂದ ಹಸಿದುಕೊಂಡಿರಬಹುದು. ಬೆಳಿಗ್ಗೆ ಬರುವಾಗ ಮನೇಲಿ ಏನೂ ಇಲ್ಲದೆ ಅವ್ವ ‘ನೀನು ಸ್ಕೂಲಿಂದ ಬರೊವೊತ್ಗೆ ಏನಾದ್ರು ಮಾಡಿರ್ತಿನಿ’ ಎಂದು ಹೇಳಿದ್ದು ಜ್ಞಾಪಕಕ್ಕೆ ಬಂದು, ನಡೆಯುತ್ತಿದ್ದವನು ಓಡತೊಡಗಿದ.

* * * * * * * * * * * * *

ಮನೆ ತಲಪಿದಾಗ ಬಸವನ ಕಣ್ಣಿಗೆ ಬಿದ್ದುದ್ದು ನಿತ್ಯ ಚಿತ್ರವೆ. ತಾಯಿ ಬಾಗಿಲ ಬಳಿಯಲ್ಲಿ ಕುಳಿತುಕೊಂಡು, ಎರಡೂ ಕಾಲನ್ನು ನೀಡಿಕೊಂಡು, ಪಕ್ಕದಲ್ಲಿ ಮೊರವನ್ನು, ಅದರಲ್ಲಿ ಹೊಗೆಸೊಪ್ಪು ಮತ್ತು ಕತ್ತರಿಸಿದ ತೂಪ್ರದ ಎಲೆಯನ್ನು ಇಟ್ಟುಕೊಂಡು ಬೀಡಿ ಕಟ್ಟುತ್ತಿದ್ದಳು. ತಂಗಿ ಪುಟ್ಟಿ ಅವ್ವನ ತೊಡೆಯ ಮೇಲೆ ಮಲಗಿಕೊಂಡು ಕೈಯಲ್ಲಿ ಒಂದು ತೂಪ್ರದ ಎಲೆಯನ್ನು ಹಿಡಿದುಕೊಂಡು ಆಡತ್ತಿದ್ದಳು. ‘ಪುಟ್ಟಿ. ಅಣ್ಣ ಬಂದ. ಏಳು ಅವನಿಗೊಂದಿಷ್ಟು ಹೊಟ್ಟೆಗೇನಾದ್ರು ಮಾಡುವ’ ಎಂದು ಮೇಲೇಳುತ್ತಿದ್ದ ಅವ್ವನನ್ನು ತಡೆದ ಬಸವ, ‘ಅವ್ವ ನಮ್ಮ ಅನಿತ ಮಿಸ್ ಬಿಸ್ಕೆಟ್ ಕೊಟ್ಟವರೆ. ಈಗ ಅದನ್ನೆ ತಿಂತಿನಿ. ಅಮೇಲೆ ಊಟ ಮಾಡ್ತಿನಿ’ ಎಂದ. ‘ಅಣ್ಣ ನಂಗೆ ಕೊಡಲ್ವ?’ ಎಂದು ತನ್ನೆಡೆಗೆ ಬಂದ ಪುಟ್ಟಿಯನ್ನು ಎತ್ತಿಕೊಂಡ ಬಸವ, ‘ನಿನಗೆ ಕೊಡೊದಿಕ್ಕೆ ಅಂತಲೆ ನಾನು ಅಲ್ಲಿಂದ ಇಲ್ಲಿವರೆಗೂ ತಿಂದಲೆ ಬಂದಿರೋದು’ ಎಂದು ಬಿಸ್ಕೆಟ್ ಪ್ಯಾಕ್ ಕಳಚಿ ಅವಳಿಗೆ ಎರಡು ಕೊಟ್ಟು ತಾನು ಎರಡು ತಿಂದು ಮುಗಿಸಿದ. ಬಿಸ್ಕೆಟ್ ಮುಗಿಯುವ ಹೊತ್ತಿಗೆ ಹೆಡ್ಮಿಸ್ ಹೇಳಿದ್ದ ಮಾತುಗಳು ನೆನಪಿಗೆ ಬಂದು, ‘ಅವ್ವ ನಾಳೆ ಫೀಸು ಕಟ್ಟದಿದ್ದರೆ ಸ್ಕೂಲಿಗೆ ಬರ್ಬೇಡ ಅಂದವರೆ ಹೆಡ್ಮಿಸ್ಸು’ ಎಂದು ತನ್ನ ಅವ್ವ ಏನು ಹೇಳುತ್ತಾಳೆ ಎಂದು ಅವಳ ಮುಖವನ್ನೇ ನೋಡಿದ. ಅವಳು ಒಮ್ಮೆ ಅವನ ಮುಖವನ್ನಷ್ಟೆ ನೋಡಿ ಮತ್ತೆ ಬೀಡಿ ಕಟ್ಟುವ ತನ್ನ ಕಾಯಕದಲ್ಲಿ ತೊಡಗಿದ್ದನ್ನು ಕಂಡು, ‘ಅವ್ವ ಎರಡು ತಿಂಗಳಿಂದು ಫೈನ್ ಸೇರಿ ನೂರೈದು ರೂಪಾಯಿ ಕೊಡ್ಬೇಕಂತೆ’ ಎಂದನು. ಈಗ ಮಾತನಾಡಿದ ಅವ್ವ, ‘ಬಸವ ನಾನೇನ್ಮಾಡ್ಲಪ್ಪ. ಮನೇಲಿ ಮೂರು ಅಕ್ಕಿ ಕಾಳಿಲ್ಲ. ನಿಮ್ಮಪ್ಪ ನೋಡಿದ್ರೆ ಕುಡ್ದು ಕುಡ್ದು ಒಂದ್ರುಪಾಯಿನೂ ಕೊಡಲ್ಲ. ಇವಂತ್ತೊಂದಿನ ಆದ್ರು ಅವನು ಕುಡಿದು ಬರ್ಲಿಲ್ಲ ಅಂದ್ರೆ ನಾಳೆ ಏನಾರ ಮಾಡಿ ಪೀಸು ಕಟ್ಟಬಹುದು’ ಎಂದು ಬೀಡಿ ಕಟ್ಟುವದನ್ನು ನಿಲ್ಲಿಸಿ ಮೇಲೆದ್ದು ‘ತಡಿ ನೋಡುವಾ’ ಎಂದು ಬೀಡಿ ಕಟ್ಟುಗಳನ್ನು ತುಂಬಿಟ್ಟಿದ್ದ ಕುಕ್ಕೆಯನ್ನು ತಂದು ನೆಲಕ್ಕೆ ಸುರಿದಳು. ‘ಬಸವ ಇದನ್ನ ಲೆಕ್ಕ ಮಾಡು. ನೋಡಾನ ಅದಾದ್ರು ವಸಿ ಆದ್ರೆ ಹೆಂಗಾದ್ರು ಮಾಡಿ ಫೀಸು ಕಟ್ಟಬಹುದು’ ಎಂದಳು. ಬಸವನ ಲೆಕ್ಕ ಸಾಗಿ ಮುನ್ನೂರರ ಗಡಿ ದಾಟುವಷ್ಟರಲ್ಲಿ ಬೀಡಿಕಟ್ಟಿನ ರಾಶಿ ಕರಗಿತ್ತು. ‘ಅವ್ವ ಮುನ್ನೂರು ಕಟ್ಟೈತೆ’ ಎಂದ ಬಸವನಿಗೆ, ‘ಹೆಂಗೊ ಎಪ್ಪೈತ್ತೈದು ರುಪಾಯಿ ಆಗುತ್ತೆ. ಇನ್ನು ಮೂವತ್ರುಪಾಯಿಗೇನು ಮಾಡದು? ಇವೊತ್ತೊಂದಿನ ಆದ್ರು ಕುಡಿದಲೆ ಬಂದ್ರೆ ಏನಾರ ಮಾಡ್ಬೌದು’ ಎನ್ನುತ್ತ ಎದ್ದು ಬೀಡಿಕಟ್ಟುಗಳನ್ನು ಚೀಲಕ್ಕೆ ತುಂಬತೊಡಗಿದಳು. ಅವ್ವನ ಕಾರ್ಯವನ್ನೇ ಗಮನಿಸುತ್ತಿದ್ದ ಬಸವನಿಗೆ ತನ್ನ ಜೇಬಿನಲ್ಲಿದ್ದ ಐದು ರುಪಾಯಿಗಳು ನೆನಪಿಗೆ ಬಂದು, ‘ಅವ್ವ ಅನಿತ ಮಿಸ್ ಕಾಫಿ ಕುಡಿ ಅಂತ ಐದು ರುಪಾಯಿ ಕೊಟ್ಟಿದ್ರು. ಅದನ್ನು ಸೇರಿಸಿದ್ರೆ ಎಂಬತ್ತು ರುಪಾಯಿ ಆಗುತ್ತೆ. ಇನ್ನು ಇಪ್ಪತ್ತೈದು ರುಪಾಯಿ ಬೇಕು’ ಎಂದ. ‘ಇರ್ಲಿ ನೋಡಾನ. ಈಗ ನೀನು ಕತ್ಲಾಗದ್ರಲ್ಲಿ ವಸಿ ಓದ್ಕೊ ಹೊಗು’ ಎಂದು ಮತ್ತೆ ಬೀಡಿ ಕಟ್ಟುವ ಕಡೆಗೆ ಗಮನ ನೀಡಿದಳು.

ಬಸವ ವಿಜ್ಞಾನದ ಕೇಡಿ ಮಾಸ್ಟರು ಮಾಡಿದ್ದ ಮಿಂಚು-ಗುಡುಗು ಪಾಠ ತಗೆದು ಓದಲು ಆರಂಭಿಸಿದ. ಸ್ವಲ್ಪ ಹೊತ್ತು ಓದುವಷ್ಟರಲ್ಲಿ ಮತ್ತೆ ಅನಿತ ಮೇಡಂ ನೆನಪಿಗೆ ಬಂದರು. ಪುಸ್ತಕ ಮಡಚಿಟ್ಟು ಕನ್ನಡದ ಪುಸ್ತಕ ಎತ್ತಿಕೊಂಡು, ‘ನಡೆ ಮುಂದೆ ನಡೆಮುಂದೆ ಹಿಗ್ಗದಯೆ ಕುಗ್ಗದಯೆ ನಡೆಮುಂದೆ’ ಎಂದು ಪದ್ಯವನ್ನು ರಾಗವಾಗಿ ಓದತೊಡಗಿದ. ಅನಿತ ಮೇಡಂ ಹೆಸರು ಎಷ್ಟು ಚನ್ನಾಗಿದೆ ಎನ್ನಿಸಿ ಪದ್ಯ ಓದುವುದನ್ನು ನಿಲ್ಲಿಸಿ ಯೋಚಿಸಿದ. ಅನಿತ ಅಂದರೆ ಏನು? ತಿಳಿಯದೆ ತಲೆ ಕೊಡವಿದಂತೆ ಮಾಡಿದ. ಯಾವುದೋ ದೇವರ ಹೆಸರೇ ಇರಬೇಕು ಅನ್ನಿಸಿತು. ನನ್ನ ಹೆಸರು ಬಸವ. ಬಸವ ಅಂದ್ರೆ ಎತ್ತು. ನನಗೆ ಯಾರು ಈ ಎತ್ತು ಅನ್ನೊ ಹೆಸರಿಟ್ಟರು ಎಂದುಕೊಂಡು ಅವ್ವನ ಕಡೆಗೆ ತಿರುಗಿ, ‘ಅವ್ವ ನನಗೆ ಯಾರು ಬಸವ ಅಂತ ಹೆಸರಿಟ್ಟಿದ್ದು?’ ಎಂದ. ಮಗ ಓದುವದನ್ನು ನಿಲ್ಲಿಸಿ ತಲೆ ಕೊಡವಿದ್ದನ್ನು ನೋಡುತ್ತಲೇ ಇದ್ದ ಅವ್ವ ಒಂದು ಕ್ಷಣ ತಡೆದು, ‘ಇನ್ನಾರು? ನಿಮ್ಮ ಚಿಕ್ಕಪ್ಪನೆ ಹೆಸರಿಟ್ಟಿದ್ದು. ಅದಾರೊ ಬಸವಣ್ಣನಂತೆ. ದೇವರ ಸಮಾನವಂತೆ. ಪ್ರತಿಯೊಬ್ಬರಲ್ಲಿನೂ ದೇವರನ್ನೆ ಕಾಣುತ್ತಿದ್ದನಂತೆ. ಅದಕ್ಕೆ ನೀನು ಅವನಾಗೆ ಆಗ್ಬೇಕು ಅಂತ ಬಸವ ಅಂತೆ ಹೆಸರಿಟ್ಟು ನಿನ್ನ ಸ್ಕೂಲಿಗೆ ಸೇರಿಸ್ದ’ ಎಂದಳು. ಬಸವನಿಗೆ ತನಗೊಬ್ಬ ಚಿಕ್ಕಪ್ಪ ಇದ್ದುದ್ದು, ಆತ ಸತ್ತಿದ್ದು ಗೊತ್ತಿತ್ತು. ಆದ್ರು ಕೇಳಿದ ‘ಅವ್ವ ಚಿಕ್ಕಪ್ಪನೆ ನನ್ನ ಸ್ಕೂಲಿಗೆ ಸೇರ್ಸಿದ್ದಾ?’ ಎಂದು. ‘ಹೂಂನಪ್ಪ. ಅವನಿಗೊ ನಿನ್ನನ್ನ ಬಾರಿ ಒದುಸ್ಬೇಕು ಅಂತ ಆಸೆ. ಆದ್ರೆ ದೇವ್ರು ಅವನನ್ನ ಬೇಗ ಕರಿಸ್ಕಂಡ. ಸಾಯೋವಾಗ ನನ್ಕೈಲಿ ಮಾತ ತಗೊಂಡ, ಏನಾದ್ರು ಮಾಡಿ ಬಸವನ್ನ ಚನ್ನಾಗಿ ಓದ್ಸಿ, ಸ್ಕೂಲ್ ಬಿಡಿಸ್ಬೇಡಿ. ಅಂತ. ಅದಕ್ಕೆ ನಾನು ಹೊಟ್ಟೆ ಬಟ್ಟೆ ಕಟ್ಟಿ ನಿನ್ನನ್ನ ಒದಸ್ತೈದಿನಿ’ ಎಂದು ಕಣ್ಣು ಮೂಗು ಒರೆಸಿಕೊಂಡಳು. ತುಂಬಾ ಹೊತ್ತು ಏನೂ ಮಾತನಾಡದೆ ಚಿಕ್ಕಂದಿನಲ್ಲಿ ತಾನು ಕಂಡಿದ್ದ ತನ್ನ ಚಿಕ್ಕಪ್ಪನನ್ನೇ ಕಾಣತೊಡಗಿದ. ತನಗೆ ಹೆಸರಿಟ್ಟ ಚಿಕ್ಕಪ್ಪ ಪುಟ್ಟಿಗೆ ಏಕೆ ಹೆಸರಿಡಲಿಲ್ಲ? ಎಂದುಕೊಂಡ. ಪುಟ್ಟಿ ಹುಟ್ಟೊ ಹೊತ್ಗೆ ಚಿಕ್ಕಪ್ಪ ಸತ್ತು ಹೋಗಿದ್ದು ಅವನಿಗೆ ಮರತೇ ಹೋಗಿತ್ತು. ‘ಅವ್ವ ಪುಟ್ಟಿಗೆ ಏಕೆ ಇನ್ನು ಹೆಸರಿಟ್ಟಿಲ್ಲ?’ ಎಂದ. ‘ಅವ್ಳಿಗೇನ ಈಗ ಅವಸ್ರ. ಏನೊ ಒಂದು ಇಟ್ಟಿದ್ರಾಯ್ತು. ಈಗ ನೀನು ಓದ್ಕೊ’ ಎಂದಳು. ‘ಆಗಲ್ಲ ಕಣವ್ವ. ಪುಟ್ಟಿಗೆ ಏನೊ ಒಂದು ಹೆಸ್ರಿಡದ್ ಬ್ಯಾಡ. ನನ್ನ ತಂಗಿಗೆ ನಾನೆ ಒಂದು ಒಳ್ಳೆ ಹೆಸ್ರು ಇಡ್ತಿನಿ’ ಎಂದು ಮತ್ತೆ ಪುಸ್ತಕ ಎತ್ತಿಕೊಂಡ.

ಕತ್ತಲಾಗಿ ಅಕ್ಷರಗಳು ಕಾಣಿಸದಂತಾದಾಗ ಅಪ್ಪ ಮನೆಗೆ ಕಾಲಿಟ್ಟ. ಅವನು ಒಳಗೆ ಬರುವ ಮೊದಲೇ ಸೆರಾಪಿನ ವಾಸನೆ ಬಂತು. ಬಂದವನೇ ಗೋಡೆಗೆ ವೊರಗಿ ಗುಟುರು ಹಾಕತೊಡಗಿದ. ಎದರಿದ ಪುಟ್ಟಿ ಅಣ್ಣನ ಕೈಹಿಡಿದು ಕುಳಿತುಕೊಂಡಳು. ಅದವಾದನ್ನೂ ಗಮನಿಸಿಯೇ ಇಲ್ಲವೆನ್ನುವಂತೆ ಬೀಡಿ ಚೀಲ ತಗೆದುಕೊಂಡು ಹೊರಟ ತಾಯಿಯನ್ನು ಬಸವ ಪುಟ್ಟಿಯ ಕೈಹಿಡಿದು ಹಿಂಬಾಲಿಸಿದ.

* * * * * * * * * * * * *

ಬೆಳಿಗ್ಗೆ ಸ್ಕೂಲಿಗೆ ಹೊರಟಾಗ ಬಸವನ ಬಳಿಯಿದ್ದ ಐದು ರುಪಾಯಿಯನ್ನು ಸೇರಿಸಿ, ಎಂಬತ್ತು ರುಪಾಯಿಗಳನ್ನು ಬಸವನ ಕೈಗೆ ಕೊಡುತ್ತ, ‘ನಿಮ್ಮ ಹೆಡ್ಮಿಸ್ಸಿಗೆ ಹೇಳಪ್ಪ. ಇರೋದೆ ಇಷ್ಟು. ಇನ್ನು ಹೇಗಾದ್ರು ಮಾಡಿ ಉಳ್ದಿದ್ದು ಇಪ್ಪತ್ತೈದ್ರುಪಾಯಿನ ಮುಂದಿನ ವಾರ ಕೊಡ್ತಿವಿ ಅಂತ’ ಎಂದ ಅವ್ವನಿಗೆ ಏನು ಹೇಳಬೇಕೆಂದು ಬಸವನಿಗೆ ತೋಚಲಿಲ್ಲ. ಪುಟ್ಟಿಗೆ ‘ಇವತ್ತು ಶನಿವಾರ. ಬೇಗ ಬರ್ತಿನಿ. ಆಟ ಆಡುವ’ ಎಂದು ಬ್ಯಾಗನ್ನು ಹೆಗಲಿಗೇರಿಸಿ ಹೊರಟೇಬಿಟ್ಟ. ‘ಹುಷಾರು’ ಎಂದ ಅವ್ವನ ದ್ವನಿ ಅಸ್ಪಷ್ಟವಾಗಿ ಬಸವನ ಕಿವಿಗೆ ಬಿತ್ತು.

ಸ್ಕೂಲಿಗೆ ಬಂದವನೆ, ಪ್ರೆಯರಿಗಿಂತ ಮುಂಚೆಯೇ ಫೀಸು ಕಟ್ಟಿಬಿಟ್ಟರೆ ಒಳ್ಳೆದು ಅಂದುಕೊಂಡು ಹೆಡ್ಮಿಸ್ಸಿನ ರೂಮಿಗೆ ನುಗ್ಗಿದ. ತನ್ನನ್ನು ಒಂದು ಪ್ರಾಣಿಯೆಂಬಂತೆ ನೋಡುತ್ತಿದ್ದ ಹೆಡ್ಮಿಸ್ಸಿನ ಮುಂದೆ ಕೈಕಟ್ಟಿ ನಿಂತು, ‘ಮಿಸ್ ನಮ್ಮವ್ವ ಹೇಳಿದ್ರು, ಈಗ ಇರೋದೆ ಎಂಬತ್ರುಪಾಯಿಯಂತೆ. ಉಳ್ದಿದ್ದನ್ನ ಮುಂದಿನ ವಾರ ಕೊಡ್ತರಂತೆ’ ಎಂದು ಒಂದೇ ಉಸಿರಿಗೆ ಹೇಳಿ, ಜೇಬಿನಿಂದ ನೋಟುಗಳನ್ನು ತಗೆದು ಕೈ ನೀಡಿದ. ಆತ ನೀಡಿದ ಕೈ ಕಡೆಗೆ ನೋಡದೆ ಹೆಡ್ಮಿಸ್ ಗುಡುಗಿದರು. ‘ಇದೇನ್ ತರ್ಕಾರಿ ವ್ಯಪಾರ ಅಂದ್ಕೊಡಿದಿಯಾ ನೀನು ಇವತ್ತತ್ತು ನಾಳೆ ಹತ್ತು ಕೊಡದಿಕ್ಕೆ. ಹೋಗು. ನಾಲ್ಕು ದಿನ ಸ್ಕೂಲಿಗೆ ಸೇರಸ್ದಿದ್ರೆ ಆಗ ಗೊತ್ತಾಗುತ್ತೆ ನಿಮ್ಮವ್ವನಿಗೆ. ಗತಿಯಿಲ್ಲದ ಮೆಲೆ ಯಾವ್ದಾದ್ರು ಗೌರ್ನಮೆಂಟ್ ಸ್ಕೂಲಲ್ಲಿ ಹೋಗಿ ಸಾಯದ್ ಬಿಟ್ಟು ಇಲ್ಲಿ ಬಂದು ನನ್ನ ತಲೆ ತಿಂತವೆ. ಇಲ್ಲಿ ಇವರ ಕಾಟ, ಅಲ್ಲಿ ಮೇನೆಜ್ಮೆಂಟಿನವರ ಕಾಟ, ಮನೇಲಿ ಗಂಡ ಮಕ್ಕಳ ಕಾಟ’ ಎಂದು ಸ್ಕೂಲಿನ ಹೆಂಚು ತುಸು ಅಳ್ಳಾಡುವಂತೆಯೇ ಕೂಗು ಹಾಕಿದರು. ನಡಗುವ ತೊಡೆಯನ್ನು ಮರೆತು ನಿಂತಿದ್ದ ಬಸವನಿಗೆ ‘ನಾನು ಎಂಬತ್ತು ರುಪಾಯಿ ತಂದಿದ್ದೀನಿ. ಹತ್ತು ರುಪಾಯಿ ಅಲ್ಲ’ ಎಂದು ಕೂಗಿ ಹೇಳಬೇಕೆನಿಸಿದರೂ ನಾಲಗೆ ಹೊರಳಲೇ ಇಲ್ಲ. ಆಗ ಬಾಗಿಲಲ್ಲಿ ಪ್ರತ್ಯಕ್ಷರಾದ ಅನಿತ ಮಿಸ್ಸು, ‘ಏನಿದು?’ ಎಂದು ನೋಡುತ್ತಿದ್ದರೆ, ಬಸವನಿಗೆ ಸ್ವಲ್ಪ ಧೈರ್ಯ ಬಂದು, ‘ಮಿಸ್, ನೂರೈದ್ರುಪಾಯಿ ಫೀಸು ಕಟ್ಟಬೇಕು. ಅವ್ವ ಎಂಬತ್ರುಪಾಯಿ ಅಷ್ಟೆ ಕೊಟ್ಟಿದ್ದು. ಉಳ್ದಿದ್ದನ್ನ ಮುಂದಿನ ವಾರ ಕೊಡುತ್ತಂತೆ’ ಎಂದು ಒಂದೇ ಉಸಿರಿಗೆ ಹೇಳಿದ. ಆತನನ್ನೆ ತಿನ್ನುವಂತೆ ನೊಡಿದ ಹೆಡ್ಮಿಸ್ ‘ನೋಡಿ ಅನಿತ. ಎರಡು ತಿಂಗಳಿನಿಂದ ಫೀಸ್ ಕಟ್ಟಿಲ್ಲ. ಕೇಳಿದ್ರೆ ಇವತ್ತಿಷ್ಟು ನಾಳೆಯಿಷ್ಟು ಅಂತಾನೆ. ಫೀಸ್ ಕಟ್ಟಾಕಾಗದ್ಮೇಲೆ ಏಕೆ ಪ್ರವೈಟ್ ಸ್ಕೊಲಿಗೆ ಬಂದು ಒದ್ದಾಡಬೇಕು’ ಅಂದರು. ಹೆಡ್ಮಿಸ್ಸಿನ ಮಾತಿಗೆ ಏನನ್ನೂ ಹೇಳದ ಅನಿತ ಬಸವನ ಕಡೆಗೆ ತಿರುಗಿ ‘ಎಲ್ಲೊ ಆ ದುಡ್ಡು ಎಷ್ಟಿದೆ ಕೊಡು’ ಎಂದರು. ಬಸವ ಕೊಟ್ಟ ನೋಟುಗಳನ್ನು ಎಣಿಸಿ ನೋಡುವಾಗ ನೆನ್ನೆ ತಾವು ಕೊಟ್ಟ ಐದು ರುಪಾಯಿ ನೋಟು ಅಲ್ಲಿದ್ದುದನ್ನು ಗಮನಿಸಿದ ಅನಿತ ಮಿಸ್ ಹೆಡ್ಮಿಸ್ಸಿನ ಕಡೆ ತಿರುಗಿ ‘ನೋಡಿ ಮೇಡಂ, ನೆನ್ನೆ ಇವ್ನು ಹೊಟ್ಟೆಗೇನು ತಿನ್ನದೆ ಹಾಗೇ ಸ್ಕೂಲಿಗೆ ಬಂದಿದ್ದ. ನಾನೆ ಐದು ರುಪಾಯಿ ಕೊಟ್ಟು ಏನಾದ್ರು ತಿನ್ನು ಅಂದಿದ್ದೆ. ನೋಡಿ ಇಲ್ಲಿ. ಇದೇ ನೋಟು. ಅದನ್ನು ಖರ್ಚು ಮಾಡದೆ ಹೇಗಾದ್ರು ಮಾಡಿ ಫೀಸು ಕಟ್ಟಬೇಕು ಅಂತ ಹೇಗೊ ಇದ್ದುದ್ರಲ್ಲಿ ಅಡ್ಜಸ್ಟ್ ಮಾಡಿ ಎಂಬತ್ತು ರುಪಾಯಿ ಕೊಟ್ಟು ಕಳ್ಸಿದಾರೆ ಅವರ ತಾಯಿ. ಏನೊ ಬಡತನ. ಅದ್ರಲ್ಲೂ ಮಗನ್ನ ಓದಸ್ಬೇಕು ಅನ್ನೊ ಆಸೆಯಿಂದ ಬಸ್‌ಸ್ಟ್ಯಾಂಡಲ್ಲಿ ಮೂಟೆ ಹತ್ತು, ಬೀಡಿ ಕಟ್ಟಿ ಇವನ ತಂದೆ ತಾಯಿ ಸ್ಕೊಲಿಗೆ ಕಳ್ಸಿದಾರೆ. ನಿಮ್ಮಂತವರೆ ಹೀಗೆ ಮಕ್ಳನ್ನ ಡಿಸಪಾಯಿಂಟ್‌ಮೆಂಟ್ ಮಾಡಿದ್ರೆ ಹೇಗೆ’ ಎಂದವರೆ ಬರಬರನೆ ಹೊರಗೆ ಹೋದರು. ಅನಿತ ಮೇಡಂ ಹೇಳೊ ಮಾತುಗಳನ್ನೇ ಕೇಳುತ್ತಿದ್ದ ಬಸವನಿಗೆ ಅವರು ಹೋದ ನಂತರ ಏನು ಮಾಡಬೇಕೆಂದು ತಿಳಿಯಲಿಲ್ಲ. ಹಾಗೆ ಹೆಡ್ಮಿಸ್ಸಿನ ಕಡೆಗೆ ನೋಡುವುದಕ್ಕೂ ಭಯವಾಯಿತು. ಇಲ್ಲೇ ನಿಲ್ಲಲೋ ಹೊರಗೆ ಓಡಲೋ ಎಂದು ಒಂದು ಕ್ಷಣ ಗೊಂದಲಕ್ಕೀಡಾದ. ಅಷ್ಟರಲ್ಲಿ ಮತ್ತೆ ಅಲ್ಲಿಗೆ ಬಂದ ಅನಿತ ಮಿಸ್ಸು ಹೆಡ್ಮಿಸ್ಸಿಗೆ ‘ತಗೊಳ್ಳಿ ಮೇಡಂ. ನೂರೈದು ರುಪಾಯಿಯಿದೆ. ಬಸವನ ಫೀಸು’ ಎಂದು ಹೇಳಿ, ಬಸವನ ಕೈಹಿಡಿದು ಹೊರಬಂದರು.

* * * * * * * * * * * * * * * * *

ಮದ್ಯಾಹ್ನ ಕಡೇ ಬೆಲ್ಲಾಗುವುದನ್ನೇ ಕಾಯುತ್ತಿದ್ದ ಬಸವ ಬಿಟ್ಟ ಬಾಣದಂತೆ ರೊಯ್ಯನೆ ಮನೆಯ ಕಡೆಗೆ ಓಡಿದ. ಮನೆಯಲ್ಲಿ ಅವ್ವ ಬೀಡಿ ಕಟ್ಟುತ್ತಿದ್ದರೆ, ಪುಟ್ಟಿ ಅವ್ವನ ಹೆಗಲಿಗೆ ಹೊರಗಿ ದೂರಿ ತೂಗಿಕೊಳ್ಳುತ್ತಿದ್ದಳು. ಬಂದವನೆ ಬ್ಯಾಗನ್ನು ಮೂಲೆಗೆಸೆದು, ‘ಅವ್ವ ಅವ್ವ ಎಲ್ಲಾ ಫೀಸುನ್ನು ಅನಿತ ಮಿಸ್ಸೆ ಕಟ್ಟಿದ್ರು. ಇಪ್ಪತ್ತೈದ್ರುಪಾಯಿನ ಕೊಡೋದು ಬ್ಯಾಡವಂತೆ. ಇನ್ಮೇಲೆ ನನ್ನ ಎಲ್ಲ ಫೀಸು ಅವರೆ ಕಟ್ಟಿ ಅವರೆ ಓದುಸ್ತಾರಂತೆ. ಅನಿತ ಮಿಸ್ಸಿನ ಗಂಡನೂ ಸ್ಕೂಲಿನ ಹತ್ರ ಬಂದಿದ್ರು. ಅವ್ರು ನಾವೇ ಒದುಸ್ತೀವಿ ಚೆನ್ನಾಗಿ ಓದ್ಬೇಕು ಅಂದ್ರು’ ಎಂದು ಒಂದೇ ಉಸಿರಿನಲ್ಲಿ ಹೇಳಿಬಿಟ್ಟ. ಕಟ್ಟುತ್ತಿದ್ದ ಬೀಡಿಯನ್ನು ಪಕ್ಕಕ್ಕಿರಿಸಿ ಬಸವನನ್ನು ಬರಸೆಳೆದು ಅಪ್ಪಿಕೊಂಡ ಅವ್ವ ‘ಆ ನನ್ನ ತಾಯಿ ಹೊಟ್ಟೆ ತಣ್ಣಗಿರ್ಲಪ್ಪ. ನನ್ಕೈಲಿ ಎಷ್ಟಾಗುತ್ತೋ ಅಷ್ಟುನ್ನ ನಾನು ಮಾಡ್ತಿನಿ. ನೀನು ಮಾತ್ರ ಚನ್ನಾಗಿ ಓದಪ್ಪ’ ಎಂದು ಕಣ್ಣೀರನ್ನೊರೆಸಿಕೊಂಡಳು. ಬಳಿಗೆ ಬಂದ ಪುಟ್ಟಿಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಳ್ಳುತ್ತ ಬಸವ ತನ್ನ ಅವ್ವನಿಗೆ ‘ ಅವ್ವ. ಪುಟ್ಟಿಗೆ ಅನಿತ ಅಂತಲೆ ಹೆಸರಿಡುವ. ಇವ್ಳು ಅವ್ರ ಹಾಗೆ ಚನ್ನಾಗಿ ಓದಿ ಟೀಚರ್ ಆಗ್ಬೇಕು. ಅವ್ರ ತರ ದೇವ್ರಾಗ್ಬೇಕು. ಮಕ್ಕಳ ಮನಸ್ಸಿನಲ್ಲಿರೊ ದೇವ್ರನ್ನು ಕಾಣತರ ಆಗ್ಬೇಕು. ಅಲ್ವೇನವ್ವ’ ಎಂದು ತಂಗಿಯನ್ನು ಮುದ್ದಿಸಿದ. ‘ಹಾಗೆ ಆಗ್ಲಪ್ಪ. ಪುಟ್ಟಿ ಇವೊತ್ತಿಂದ ಅನಿತ’ ಎಂದು ಆಕೆಯೂ ಮಗಳನ್ನು ಮುದ್ದುಸಿದಳು. ಮದ್ಯಾಹ್ನದ ಊಟದ ವಿಷಯ ಅವರಾರ ಗಮನಕ್ಕೂ ಬರಲೇ ಇಲ್ಲ.

* * * * * * * * * * * *